Basavanna Vachanagalu In Kannada:
Basavanna Vachanagalu In Kannada
ಕಾಳಿಯ ಕಂಕಾಳದಿಂದ ಮುನ್ನ
ತ್ರಿಪುರ ಸಂಹಾರದಿಂದ ಮುನ್ನ
ಹರಿವಿರಿಂಚಿಗಳಿಂದ ಮುನ್ನ
ಉಮೆಯ ಕಲ್ಯಾಣದಿಂದ ಮುನ್ನ
ಮುನ್ನ, ಮುನ್ನ, ಮುನ್ನ,
ಅಂದಂದಿಗೆ ಎಳೆಯ ನೀನು, ಹಳೆಯ ನಾನು
ಮಹಾದಾನಿ ಕೂಡಲಸಂಗಮದೇವ.
ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ
ಸಂಸಾರವೆಂಬ ರಾಹು ಸರ್ವಗ್ರಾಸಿಯಾಗಿ ನುಂಗಿತ್ತಯ್ಯ,
ಇಂದೆನ್ನ ದೇಹಕ್ಕೆ ಗ್ರಹಣವಾಯಿತ್ತು.
ಇನ್ನೆಂದಿಂಗೆ ಮೋಕ್ಷವಹುದೋ ?! ಕೂಡಲಸಂಗಮದೇವ.
ಕಾಲಲಿ ಕಟ್ಟಿದ ಗುಂಡು, ಕೊರಳಲಿ ಕಟ್ಟಿದ ಬೆಂಡು!
ತೇಲಲೀಯದು ಗುಂಡು, ಮುಳುಗಲೀಯದು ಬೆಂಡು!
ಇಂತಪ್ಪ ಸಂಸಾರಶರಧಿಯ ದಾಂಟಿಸಿ
ಕಾಲಾಂತಕನೇ ಕಾಯೋ, ಕೂಡಲಸಂಗಯ್ಯ!
ಲೇಸ ಕಂಡು ಮನ ಬಯಸಿ ಬಯಸಿ
ಆಶೆ ಮಾಡಿದರಿಲ್ಲ ಕಂಡಯ್ಯ.
ತಾಳಮರಕ್ಕೆ ಕೈಯ್ಯ ನೀಡಿ, ಮೇಲ ನೋಡಿ
ಗೋಣು ನೊಂದುದಯ್ಯ.
ಕೂಡಲಸಂಗಮದೇವ ಕೇಳಯ್ಯ
ನೀನೀವ ಕಾಲಕ್ಕಲ್ಲದಿಲ್ಲ ಕಂಡಯ್ಯ.
ಮುಂಗಯ್ಯ ಕಂಕಣಕೆ ಕನ್ನಡಿಯ ತೋರುವಂತೆ
ಎನ್ನ ಮನ ನಿಧಾನವನೊಲ್ಲದೆ ಜರಗ ಮೆಚ್ಚಿತ್ತು ನೋಡಾ
ನಾಯಿಗೆ ನಾರಿವಾಣವಕ್ಕುವುದೆ ? ಕೂಡಲಸಂಗಮದೇವ.
Small Basavanna Vachanagalu In Kannada
ಎನ್ನ ಚಿತ್ತವು ಅತ್ತಿಯ ಹಣ್ಣು ನೋಡಯ್ಯ,
ವಿಚಾರಿಸಿದರೇನು ಹುರುಳಿಲ್ಲವಯ್ಯ.
ಪ್ರಪಂಚಿನ ಡಂಬಿನಲ್ಲಿ ಎನ್ನನೊಂದು ರೂಹುಮಾಡಿ
ನೀವಿರಿಸಿದಿರಯ್ಯ ಕೂಡಲಸಂಗಮದೇವ.
ಮುನಿದೆಯಾದರೆ ಒಮ್ಮೆ ಜರಿದರೆ ಸಾಲದೆ ?
ಅಕಟಕಟ, ಮದನಂಗೆ ಮಾರುಗೊಡುವರೆ ?
ಹಗೆಗೆ ಮಾರುಗೊಟ್ಟು ನಿನ್ನವರನೊಪ್ಪಿಸುವರೆ ?
ಕೂಡಲಸಂಗಮದೇವ ?
ವಿಕಳನಾದೆನು ಪಂಚೇಂದ್ರಿಯಧಾತುವಿಂದ!
ಮತಿಗೆಟ್ಟನು ಮನದ ವಿಕಾರದಿಂದ!
ಧೃತಿಗೆಟ್ಟೆನು ಕಾಯವಿಕಾರದಿಂದ!
ಶರಣುವೊಕ್ಕೆನು ಕೂಡಲಸಂಗಮದೇವಯ್ಯ
ಎನ್ನುವನು ಕಾಯಯ್ಯ.
ಆನು ಒಬ್ಬನು; ಸುಡುವರೈವರು.
ಮೇಲೆ ಕಿಚ್ಚು ಘನ, ನಿಲಲು ಬಾರದು.
ಕಾಡುಬಸವನ ಹುಲಿ ಕೊಂಡೊಯ್ದರೆ
ಆರೈಯಲಾಗದೆ ಕೂಡಲಸಂಗಮದೇವ ?
ಕೆಸರಲ್ಲಿ ಬಿದ್ದ ಪಶುವಿನಂತೆ
ಅನು ದೆಸೆದೆಸೆಗೆ ಬಾಯ ಬಿಡುತಿದ್ದೇನಯ್ಯ
ಅಯ್ಯಾ, ಆರೈವರಿಲ್ಲ–
“ಅಕಟಕಟಾ! ಪಶು” ವೆಂದೆನ್ನ
ಕೂಡಲಸಂಗಮದೇವ ಕೊಂಬ ಹಿಡಿದೆತ್ತುವನ್ನಕ.
Basavanna Vachanagalu In Kannada With Meaning
ಬಡಪಶು ಪಂಕದಲ್ಲಿ ಬಿದ್ದರೆ
ಕಾಲ ಬಡಿವುದಲ್ಲದೆ, ಬೇರೆ ಗತಿಯುಂಟೆ ?
ಶಿವ ಶಿವಾ! ಹೋದಹೆ, ಹೋದಹೆನಯ್ಯ!
ನಿಮ್ಮ ಮನದೆತ್ತಲೆನ್ನ ತೆಗೆಯಯ್ಯ
ಪಶುವಾನು, ಪಶುಪತಿ ನೀನು.
ತುಡುಗುಣಿಯೆಂದೆನ್ನ ಹಿಡಿದು ಬಡಿಯದ ಮುನ್ನ.
ಒಡೆಯ, ನಿಮ್ಮ ಬಯ್ಯದಂತೆ ಮಾಡು
ಕೂಡಲಸಂಗಮದೇವ.
ಸಮುದ್ರದೊಳಗಣ ಸಿಂಪಿನಂತೆ ಬಾಯ ಬಿಡುತಿದ್ದೇನಯ್ಯ!
ನೀವಲ್ಲದೆ ಮತ್ತಾರೂ ಎನ್ನನರಿವರಿಲ್ಲ ನೋಡಯ್ಯ!
ಕೂಡಲಸಂಗಮದೇವ, ನೀನಲ್ಲದೊಳಕೊಂಬವರಿಲ್ಲವಯ್ಯ.
ನೀ ಹುಟ್ಟಿಸಿದಲ್ಲಿ ಹುಟ್ಟಿ, ನೀ ಕೊಂದಲ್ಲಿ ಸಾಯದೆ
ಎನ್ನ ವಶವೇ ಅಯ್ಯ ?
ನೀನಿರಿಸಿದಲ್ಲಿ ಇರದೆ ಎನ್ನ ವಶವೇ ಅಯ್ಯ.
ಅಕಟಕಟಾ ಎನ್ನವನೆನ್ನವನೆನ್ನಯ್ಯ ಕೂಡಲಸಂಗಮದೇವಯ್ಯ.
ನರವಿಂಧ್ಯದೊಳಗೆನ್ನ ಹುಲುಗಿಳಿಯ ಮಾಡಿ
ಸಲಹುತ್ತ, “ಶಿವಶಿವಾ” ಎಂದೋದಿಸಯ್ಯ.
ಭಕ್ತಿ ಎಂಬ ಪಂಜರದೊಳಗಿಕ್ಕಿ ಸಲಹು ಕೂಡಲಸಂಗಮದೇವ.
ಎನ್ನ ವಾಮ-ಕ್ಷೇಮ ನಿಮ್ಮದಯ್ಯ
ಎನ್ನ ಹಾನಿ-ವೃದ್ಧಿ ನಿಮ್ಮದಯ್ಯ
ಎನ್ನ ಮಾನಾಪಮಾನವು ನಿಮ್ಮದಯ್ಯ
ಬಳ್ಳಿಗೆ ಕಾಯಿ ದಿಮ್ಮಿತ್ತೆ ? ಕೂಡಲಸಂಗಮದೇವ.
ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯ.
ಇವ ನಮ್ಮವ, ಇವ ನಮ್ಮವ, ಇವನಮ್ಮವನೆಂದೆನಿಸಯ್ಯ
ಕೂಡಲಸಂಗಮದೇವಯ್ಯ ನಿಮ್ಮ ಮನೆಯ ಮಗನೆಂದೆನಿಸಯ್ಯ.
Basavanna Vachanagalu In Kannada Songs
ನರ ಕೂರಂಬಿನಲೆಚ್ಚ; ಅವಂಗೊಲಿದೆಯಯ್ಯ
ಅರಳಂಬಿನಲೆಚ್ಚ ಕಾಮನನುರಹಿದೆಯಯ್ಯ.
ಇರುಳು ಹಗಲೆನ್ನದೆ ಪ್ರಾಣಘಾತವ ಮಾಡಿದ ಬೇಡನ
ಕೈಲಾಸಕೊಯ್ದೆಯಯ್ಯ.
ಎನ್ನನೇತಕೆ ಒಲ್ಲೆ ಕೂಡಲಸಂಗಮದೇವ ?
ನೀನೊಲಿದರೆ ಕೊರಡು ಕೊನರುವುದಯ್ಯ.
ನೀನೊಲಿದರೆ ಬರಡು ಹಯನಹುದಯ್ಯ.
ನೀನೊಲಿದರೆ ವಿಷವಮೃತವಹುದಯ್ಯ.
ನೀನೊಲಿದರೆ ಸಕಲ ಪಡಿಪದಾರ್ಥ ಇದಿರಲಿಪ್ಪವು
ಕೂಡಲಸಂಗಮದೇವ.
ಕರಿಯಂಜುವುದು ಅಂಕುಶಕ್ಕಯ್ಯ!
ಗಿರಿಯಂಜುವುದು ಕುಲಿಶಕ್ಕಯ್ಯ!
ತಮಂಧವಂಜುವುದು ಜ್ಯೋತಿಗಯ್ಯ!
ಕಾನನವಂಜುವುದು ಬೇಗೆಗಯ್ಯ!
ಪಂಚಮಹಾಪಾತಕವಂಜುವುದು
ನಮ್ಮ ಕೂಡಲಸಂಗನ ನಾಮಕ್ಕಯ್ಯ!
ನೀರಿಂಗೆ ನೈದಿಲೇ ಶೃಂಗಾರ,
ಊರಿಂಗೆ ಆರವೆಯೇ ಶೃಂಗಾರ,
ಸಮುದ್ರಕ್ಕೆ ತೆರೆಯೇ ಶೃಂಗಾರ
ನಾರಿಗೆ ಗುಣವೇ ಶೃಂಗಾರ
ಗಗನಕ್ಕೆ ಚಂದ್ರಮನೇ ಶೃಂಗಾರ
ನಮ್ಮ ಕೂಡಲಸಂಗನ ಶರಣರಿಗೆ ನೊಸಲ ವಿಭೂತಿಯೇ ಶೃಂಗಾರ.
Basavanna Vachanagalu In Kannada Lyrics
ಅಕಟಕಟಾ ಬೆಡಗುಬಿನ್ನಾಣವೇನೋ ?!
‘ಓಂ ನಮಶ್ಶಿವಾಯ’ ಎಂಬುದೇ ಮಂತ್ರ!
‘ಓಂ ನಮಶ್ಶಿವಾಯ’ ಎಂಬುದೇ ತಂತ್ರ!
ನಮ್ಮ ಕೂಡಲಸಂಗಮದೇವರ ಮಾಣದೆ ನೆನವುದೇ ಮಂತ್ರ!
ಎಮ್ಮವರು ಬೆಸಗೊಂಡರೆ ಶುಭಲಗ್ನವೆಂದೆನ್ನಿರಯ್ಯ
ರಾಶಿ ಕೂಟ ಋಣ ಸಂಬಂಧ ಉಂಟೆಂದು ಹೇಳಿರಯ್ಯ
ನಾಳಿನ ದಿನಕಿಂದಿನ ದಿನ ಲೇಸೆಂದು ಹೇಳಿರಯ್ಯ
ಚಂದ್ರಬಲ ತಾರಾಬಲ ಉಂಟೆಂದು ಹೇಳಿರಯ್ಯ
ಕೂಡಲಸಂಗಮದೇವನ ಪೂಜಿಸಿದ ಫಲ ನಿಮ್ಮದಯ್ಯ.
ತಾಳಮರದ ಕೆಳಗೆ ಒಂದು ಹಾಲ ಹರವಿಯಿದ್ದರೆ
ಅದ ಹಾಲ ಹರವಿಯೆನ್ನರು: ಸುರೆಯ ಹರವಿಯೆಂಬರು.
ಈ ಭಾವಸಂದೆಯವ ಮಾಣಿಸಾ ಕೂಡಲಸಂಗಮದೇವ.
ಕುಂಬಳ ಕಾಯಿಗೆ ಕಬ್ಬುನದ ಕಟ್ಟ ಕೊಟ್ಟರೆ
ಕೊಳೆವುದಲ್ಲದೆ ಅದು ಬಲುಹಾಗ ಬಲ್ಲುದೆ ?
ಅಳಿಮನದವಂಗೆ ದೀಕ್ಷೆಯ ಕೊಟ್ಟರೆ
ಭಕ್ತಿಯೆಂತಹುದು ?
ಮುನ್ನಿನಂತೆ, ಕೂಡಲಸಂಗಯ್ಯ!
ಮನಹೀನನ ಮೀಸಲ ಕಾಯ್ದಿರಿಸಿದಂತೆ!!
ಒಳಗೆ ಕುಟಿಲ, ಹೊರಗೆ ವಿನಯವಾಗಿ
ಭಕ್ತರೆನಿಸಿಕೊಂಬವರನೊಲ್ಲನಯ್ಯಾ ಲಿಂಗವು!
ಅವರು ಸತ್ಪಥಕ್ಕೆ ಸಲ್ಲರು ಸಲ್ಲರಯ್ಯ!
ಒಳಹೊರಗೊಂದಾಗದವರಿಗೆ ಅಳಿಯಾಸೆದೋರಿ
ಬೀಸಾಡುವನವರ ಜಗದೀಶ ಕೂಡಲಸಂಗಮದೇವ.
ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ ?
ಹೊಸ್ತಿಲಲ್ಲಿ ಹುಲ್ಲು ಹುಟ್ಟಿ, ಮನೆಯೊಳಗೆ ರಜ ತುಂಬಿ
ಮನೆಯೊಳಗೆ ಮನೆಯೊಡೆಯನಿಲ್ಲ!
ತನುವಿನಲಿ ಹುಸಿ ತುಂಬಿ, ಮನದಲ್ಲಿ ವಿಷಯ ತುಂಬಿ
ಮನೆಯೊಳಗೆ ಮನೆಯೊಡೆಯನಿಲ್ಲ!
ಕೂಡಲಸಂಗಮದೇವ.
Also Read